ಬೆಂಗಳೂರು: ದೆಹಲಿ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಿರೋ ಸಿಎಂ ಬಸವರಾಜ್ ಬೊಮ್ಮಾಯಿ, ದೆಹಲಿ ಪ್ರವಾಸ ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ.
ಆರ್.ಟಿ.ನಗರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ದೆಹಲಿ ಪ್ರವಾಸ ಯಶಸ್ವಿಯಾಗಿದೆ. ಎರಡು ದೃಷ್ಟಿಯಿಂದ ರಾಜ್ಯಕ್ಕೆ ಯಶಸ್ವಿಯಾಗಿದ್ದು, ಒಂದು ನಮ್ಮ ರಾಜ್ಯಕ್ಕೆ ಬೇಕಾಗಿರುವ ಕಲ್ಲಿದ್ದಲು ಒರಿಸ್ಸಾದಲ್ಲಿ ಉಪಯೋಗಿಸಲು ಅವಕಾಶ ಸಿಕ್ಕಿದೆ. ಹೆಚ್ಚುವರಿಯಾಗಿ ಮಹಾರಾಷ್ಟ್ರದಲ್ಲಿ ಕಲ್ಲಿದ್ದಲು ನೀಡ್ತಾರೆ. ಬರುವ ದಿನಗಳಲ್ಲಿ ಕಲ್ಲಿದ್ದಲು ಸಮಸ್ಯೆ ಆಗಲ್ಲ ಅನ್ನೂ ನಂಬಿಕೆ ಇದೆ. ಎರಡನೇದು ಆಹಾರ ನಾಗರೀಕ ಪೂರೈಕೆ ಇಲಾಖೆಗೆ ಸಂಬಂಧಿಸಿದಂತೆ ತುಂಬಾ ಬೇಡಿಕೆಗಳಿತ್ತು. ಸುಮಾರು 2,100 ಕೋಟಿ ಅನುದಾನ ಬಿಡುಗಡೆ ಆಗಬೇಕಿತ್ತು. ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಬಿಡುಗಡೆ ಮಾಡ್ತೀವಿ ಅಂತ ಹೇಳಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ, ಅಮಿಶ್ ಶಾ ಅವರನ್ನು ಭೇಟಿ ಮಾಡಿದೆ. ಒಟ್ಟಾರೆ ದೆಹಲಿ ಪ್ರವಾಸ ಬಹಳ ಯಶಸ್ವಿಯಾಗಿದೆ ಎಂದರು. ಅಲ್ಲದೇ ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 100 ದಿನಗಳಲ್ಲಿ ನಾವು ತೆಗೆದುಕೊಂಡ ನಿರ್ಣಯಗಳ ಬಗ್ಗೆ ಶ್ಲಾಘನೆ ವ್ಯಕ್ತಿಪಡಿಸಿ ಯೋಜನೆಗಳ ಬಗ್ಗೆ ವಿವರಣೆ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.