ಬೆಂಗಳೂರು: ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ಹರ್ಷ ಎಂದ ನಮ್ಮ ಸಂಘಟನೆಯ ಕಾರ್ಯಕರ್ತನೆ ಕೊಲೆ ಆಗಿದೆ. ಈ ಬಗ್ಗೆ ಈಗಾಗಲೇ ಪೊಲೀಸರ ತನಿಖೆ ಆರಂಭವಾಗಿದ್ದು, ಅತೀ ಶೀಘ್ರವೇ ಆರೋಪಿಗಳ ಬಂಧನ ಆಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ನಿನ್ನೆ ರಾತ್ರಿ ಹಿಂದೂ ಹರ್ಷ ಎಂಬ ನಮ್ಮ ಸಂಘಟನೆಯ ಕಾರ್ಯಕರ್ತನ ಹತ್ಯೆಯಾಗಿದೆ. ಪ್ರಕರಣದ ತನಿಖೆ ಆರಂಭವಾಗಿದ್ದು, ಹಲವರು ಸುಳಿವುಗಳು ಸಿಕ್ಕಿದೆ ಅಂತ ನನಗೆ ಮಾಹಿತಿ ಲಭ್ಯವಾಗಿದೆ. ಶೀಘ್ರವೇ ಆರೋಪಿಗಳ ಬಂಧನ ಆಗಲಿದೆ. ಈ ನಡುವೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿ ಎಂದೂ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಇಂತಹ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡುತ್ತೇನೆ. ಶಾಂತಿ ಕಾಪಾಡುವಂತೆ ಎಲ್ಲರಲ್ಲೂ ಮನವಿ ಮಾಡುತ್ತೇನೆ ಎಂದು ಹೇಳಿದರು.
ಇನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮಾತನಾಡಿ, ಶಿವಮೊಗ್ಗದಲ್ಲಿ 26 ವರ್ಷ ಹರ್ಷ ಎಂಬ ವ್ಯಕ್ತಿಯನ್ನು ಕೊಲೆ ಮಾಡಿರೋದು ಖಂಡನೀಯ. ಈಗಾಗಲೇ ಗೃಹ ಸಚಿವರು ಹೇಳಿಕೆ ನೀಡಿ ಶೀಘ್ರವೇ ಆರೋಪಿಗಳನ್ನು ಬಂಧನ ಮಾಡೋದಾಗಿ ತಿಳಿಸಿದ್ದಾರೆ. ಈ ರೀತಿಯ ಘಟನೆ ರಾಜ್ಯದ ಯಾವುದೇ ಭಾಗದಲ್ಲಿ ನಡೆದರೂ ಕೂಡ ಖಂಡನೀಯ. ಇಂತಹ ಗೂಂಡಾಗಿರಿ ಮಾಡಿ ಕೊಲೆ ಮಾಡೋದರಲ್ಲಿ ನಿರತರಾಗಿರೋ ವ್ಯಕ್ತಿಗಳಿಗೆ ತಕ್ಕ ಶಿಕ್ಷೆ ಆದರೆ ಇಂತಹ ಘಟನೆಗಳು ಮರುಕಳುಹಿಸೋದಿಲ್ಲ. ಇದನ್ನು ರಾಜ್ಯ ಸರ್ಕಾರ, ಗೃಹ ಸಚಿವರು ಮಾಡ್ತಾರೆ ಅನ್ನೋ ವಿಶ್ವಾಸವಿದೆ. ಕುಟುಂಬದ ಸದಸ್ಯನನ್ನು ಕಳೆದುಕೊಂಡವರಿಗೆ ಈ ದುಃಖ ಬರಿಸೋ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.