Chamrajpet Ground: ಚಾಮರಾಜಪೇಟೆಯ ಮೈದಾನ ವಿವಾದ ಅಂತ್ಯಗೊಂಡಿದ್ದು, ಅದಿನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಆಸ್ತಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ.
ಬೆಂಗಳೂರು: ಚಾಮರಾಜಪೇಟೆಯ ಮೈದಾನ (Chamrajpet Ground) ವಿವಾದ ಅಂತ್ಯಗೊಂಡಿದ್ದು, ಅದಿನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಆಸ್ತಿ (Revenue Department) ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ BBMP) ಆದೇಶ ಹೊರಡಿಸಿದೆ. ಇದರೊಂದಿಗೆ ಚಾಮರಾಜಪೇಟೆಯ ಮೈದಾನದಲ್ಲಿ 75 ನೇ ಸ್ವಾತಂತ್ರ್ಯ ಅಮೃತಮಹೋತ್ಸವದ ತಿರಂಗಾ ಹಾರಾಡೋದು ಖಚಿತವಾಗಿದೆ.
75ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಜಂಟಿ ಆಯುಕ್ತ ಶ್ರೀನಿವಾಸ್ ಅವರಿಂದ ಐತಿಹಾಸಿಕ ಆದೇಶ ಪ್ರಕಟ
ಮೈದಾನವನ್ನು ತಮ್ಮ ಹೆಸರಿಗೆ ಖಾತಾ ಇಂಡೀಕರಣಕ್ಕೆ ವಕ್ಫ್ ಬೋರ್ಡ್ ಬಿಬಿಎಂಪಿಗೆ ಅರ್ಜಿ ಸಲ್ಲಿಸಿತ್ತು. ವಕ್ಫ್ ಬೋರ್ಡ್ ಅರ್ಜಿ ವಜಾಗೊಳಿಸಿದ ಬಿಬಿಎಂಪಿ ಚಾಮರಾಜಪೇಟೆ ಮೈದಾನ ರಾಜ್ಯ ಸರ್ಕಾರದ್ದು ಎಂದು ಆದೇಶ ಹೊರಡಿಸಿದೆ. ಇದರೊಂದಿಗೆ ಚಾಮರಾಜಪೇಟೆ ಜನರ 60 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದಂತಾಗಿದೆ. ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್ ಈ ಐತಿಹಾಸಿಕ ಆದೇಶ ಪ್ರಕಟಿಸಿದ್ದಾರೆ.