
ಕೇರಳದಲ್ಲಿ ಮಳ
Kerala Monsoon: ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ರಾಜ್ಯದ ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಈಗಾಗಲೇ ಐದು ತಂಡಗಳನ್ನು ಕೇರಳಕ್ಕೆ ನಿಯೋಜಿಸಿದೆ.
ತಿರುವನಂತಪುರಂ: ಕೇರಳದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಇಂದು ಕೇರಳದ 12 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ತಿರುವನಂತಪುರಂ ಮತ್ತು ಕೊಲ್ಲಂ ಹೊರತುಪಡಿಸಿ ಕೇರಳದ ಎಲ್ಲಾ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಉತ್ತರ ತಮಿಳುನಾಡು ಮತ್ತು ಪಕ್ಕದ ಪ್ರದೇಶಗಳಲ್ಲಿನ ಚಂಡಮಾರುತದ ಚಲನೆಯು ದಕ್ಷಿಣ ರಾಜ್ಯದ ಹಲವಾರು ಭಾಗಗಳಲ್ಲಿ ಅತಿ ಹೆಚ್ಚು ಮಳೆಗೆ ಕಾರಣವಾಗುತ್ತದೆ ಎಂದು ಹೇಳಿದೆ.
ಕೇರಳದಲ್ಲಿ ಮುಂದಿನ 2 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿತ್ತು. ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ರಾಜ್ಯದ ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯನ್ನು ಪರಿಗಣಿಸಿ ಮತ್ತು ರಾಜ್ಯದಲ್ಲಿ ಮುಂಗಾರು ಆರಂಭಕ್ಕೆ ಉತ್ತಮ ಸಿದ್ಧತೆ ಮಾಡಿಕೊಳ್ಳಲು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೇರಳದ ಮುಖ್ಯಮಂತ್ರಿಗಳು ಹೊರಡಿಸಿದ ಕೆಲವು ಸೂಚನೆಗಳೆಂದರೆ, ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿರುವ ವಿಪತ್ತು ಪೀಡಿತ ಪ್ರದೇಶಗಳ ಪಟ್ಟಿಯನ್ನು ಸಿದ್ಧಪಡಿಸಬೇಕು ಮತ್ತು ಅದನ್ನು ಪೊಲೀಸ್ ಮತ್ತು ಅಗ್ನಿಶಾಮಕ ಸೇವೆಗಳಂತಹ ಅಧಿಕಾರಿಗಳಿಗೆ ಒದಗಿಸಬೇಕು, ಸ್ಥಳಾಂತರಿಸಲು ಸಾಕಷ್ಟು ಸೌಲಭ್ಯಗಳೊಂದಿಗೆ ಪರಿಹಾರ ಶಿಬಿರಗಳು ಸ್ಥಳದಲ್ಲಿವೆ ಎಂದು ಖಚಿತಪಡಿಸಿಕೊಳ್ಳಬೇಕು. ಗಟಾರಗಳು ಮತ್ತು ನದಿಗಳ ಹೂಳು ತೆಗೆಯಬೇಕು.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಈಗಾಗಲೇ ಐದು ತಂಡಗಳನ್ನು ಕೇರಳಕ್ಕೆ ನಿಯೋಜಿಸಿದೆ. ಕಾಸರಗೋಡು, ಕಣ್ಣೂರು, ವಯನಾಡ್, ಕೋಝಿಕ್ಕೋಡ್, ಮಲಪ್ಪುರಂ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಇಡುಕ್ಕಿ, ಕೊಟ್ಟಾಯಂ, ಆಲಪ್ಪುಳ ಮತ್ತು ಪತ್ತನಂತಿಟ್ಟ ಎಂಬ 12 ಕೇರಳ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ‘ಆರೆಂಜ್’ ಅಲರ್ಟ್ ಘೋಷಿಸಿದೆ.