ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಕರ್ನಾಟಕ ಸರ್ಕಾರವು ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇಡೀ ಶೈಕ್ಷಣಿಕ ವರ್ಷಕ್ಕೆ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲಿದ್ದು, ಯುಜಿಸಿ ನಿಯಮ ಅನುಸರಿಸಿ ಅರ್ಹತೆಯನ್ನು ನಿಗದಿಪಡಿಸಲಾಗಿದೆ. ಈವರೆಗೆ ₹ 13,000 ವೇತನ ಪಡೆಯುತ್ತಿದ್ದವರು ಮುಂದಿನ ದಿನಗಳಲ್ಲಿ ₹ 32,000 ಪಡೆಯಲಿದ್ದಾರೆ. ₹ 11,000 ವೇತನ ಪಡೆಯುತ್ತಿದ್ದವರು ₹ 28,000 ಪಡೆಯಲಿದ್ದಾರೆ. ಪ್ರತಿ ತಿಂಗಳ 10ನೇ ತಾರೀಖಿನೊಳಗೆ ವೇತನ ಪಾವತಿಗೆ ವ್ಯವಸ್ಥೆ ರೂಪಿಸಲಾಗುವುದು ಎಂದು ಸರ್ಕಾರವು ಭರವಸೆ ನೀಡಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಕಳೆದ ಒಂದು ತಿಂಗಳಿನಿಂದ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದರು. ಹೋರಾಟದ ನಂತರ ಎಚ್ಚೆತ್ತ ಸರ್ಕಾರವು ಉಪನ್ಯಾಸಕರಿಗೆ ಹಲವು ಸೌಲಭ್ಯಗಳನ್ನು ಒದಗಿಸಲು ಮುಂದಾಗಿತ್ತು.
ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸುವುದಕ್ಕೆ ರಾಜ್ಯ ಸರ್ಕಾರ ನಿರ್ಧಾರ
ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸಲು ರಾಜ್ಯ ಸರ್ಕಾರವು ನಿರ್ಧಾರ ಕೈಗೊಂಡಿದೆ. ಕಳೆದ ಸಾಲಿನಲ್ಲಿ ಬೇರೆಬೇರೆ ವಿಶ್ವವಿದ್ಯಾಲಯಗಳಲ್ಲಿ ಕಾರ್ಯನಿರ್ವಹಿಸಿದ ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸುವುದಕ್ಕೆ ನಿರ್ಧಾರ ಮಾಡಲಾಗಿದೆ. 2021-22ನೇ ಸಾಲಿಗೂ ಸೇವೆ ಮುಂದುವರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ಸಾಲಿನಲ್ಲಿ ಅತಿಥಿ ಉಪನ್ಯಾಸಕರಾಗಿ ಇದ್ದವರನ್ನು ಒಂದು ದಿನದ ಮಟ್ಟಿಗೆ ಸೇವೆಯಿಂದ ಬಿಡುಗಡೆಗೊಳಿಸಿ ಪುನಃ ಸೇವೆಗೆ ಸೇರಿಸಿಕೊಳ್ಳಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಕೊವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕ ಹಾಗೂ ಶೈಕ್ಷಣಿಕ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಈ ಮೊದಲು ಸಲಹೆ ನೀಡಿದ್ದರು. ಅಂದಿನ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಪತ್ರ ಬರೆದಿದ್ದರು. ರಾಜ್ಯದ 412 ಪದವಿ ಕಾಲೇಜುಗಳಲ್ಲಿ ಸುಮಾರು 14,564 ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗದ ನಿಯಮಾವಳಿ ಪ್ರಕಾರ, ಅತಿಥಿ ಉಪನ್ಯಾಸಕರು ವಿದ್ಯಾರ್ಹತೆಯನ್ನು ಹೊಂದಿರುತ್ತಾರೆ. ಕಳೆದ 2 ವರ್ಷಗಳಿಂದ ಕೊರೊನಾ ಹಿನ್ನೆಲೆ ಅತಿಥಿ ಉಪನ್ಯಾಸಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದರು.
ಅತಿ ಕಡಿಮೆ ವೇತನ ಮತ್ತು ಸೇವಾ ಭದ್ರತೆ ಇಲ್ಲದ ಕಾರಣ ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕೆಂದು ಸೂಚಿಸಿದ್ದರು. ಈಗಾಗಲೇ ಕಡಿಮೆ ವೇತನ ಮತ್ತು ಭದ್ರತೆ ಇಲ್ಲದ ಕಾರಣ ರಾಜ್ಯದಲ್ಲಿ ಹಲವಾರು ಉಪನ್ಯಾಸಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎಲ್ಲಾ ವಿದ್ಯಾರ್ಹತೆ ಹೊಂದಿ, ಹಲವು ವರ್ಷಗಳ ಅನುಭವ ಅತಿಥಿ ಉಪನ್ಯಾಸಕರಿಗಿದೆ. ಹಲವಾರು ಜನ ವಯೋವಿತಿ ಮೀರುತ್ತಿರುವುದರಿಂದ ಅಭದ್ರತೆಯಲ್ಲಿ ಸಿಲುಕಿದ್ದಾರೆ ಎಂದು ವಿವರಿಸಿದ್ದರು. ಇವರಂತೆಯೇ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಹಂಗಾಮಿಯಾಗಿ ಕರ್ತವ್ಯ ನಿರ್ವಹಿಸಿದ ಪದನಾಮ ಬದಲಾದ ಸ್ಥಳೀಯ ಅಭ್ಯರ್ಥಿ, ಸ್ಟಾಪ್ ಗ್ಯಾಪ್, ಗುತ್ತಿಗೆ ಆಧಾರಿತ, ಅರೆಕಾಲಿಕ ಉಪನ್ಯಾಸಕರುಗಳನ್ನು ಸರ್ಕಾರ ಮಾನವೀಯತೆಯ ಆಧಾರದ ಮೇಲೆ ಸೂಕ್ತ ಕಾಯ್ದೆ ತಿದ್ದುಪಡಿ ಮಾಡಿ ಅಂಥವರನ್ನ 1982, 1992, 1996 ಮತ್ತು 2003ರಲ್ಲಿ ಖಾಯಂ ಮಾಡಿರುವ ಉದಾಹರಣೆಗಳಿವೆ. ಅದೇ ಮಾದರಿಯಲ್ಲಿ ಈಗ ಕೆಲಸ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿ. ಈ ಬಗ್ಗೆ ಸರ್ಕಾರ ಅಗತ್ಯ ಕ್ರಮ ವಹಿಸುವಂತೆ ಬಸವರಾಜ ಹೊರಟ್ಟಿ ಮುಖ್ಯಮಂತ್ರಿಗೆ ಪತ್ರದ ಬರೆದಿದ್ದರು.